1995ರ ನಂತರದ ಕನ್ನಡ ಶಾಲೆಗಳ ಉಳಿವಿಗೆ ಸಚಿವರ ಮಹತ್ವದ ಭರವಸೆ
ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಆದ್ಯತೆಯ ಕರ್ತವ್ಯ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ (ರಿ.) ಪದಾಧಿಕಾರಿಗಳು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವ ಎಸ್. ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.
1995ರ ನಂತರ ಆರಂಭವಾದ ಕನ್ನಡ ಶಾಲೆಗಳ ಸಂಕಷ್ಟ
ರಾಜ್ಯಾದ್ಯಂತ 1995ರ ನಂತರ ಪ್ರಾರಂಭವಾಗಿರುವ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳು ಕಳೆದ ಮೂರು ದಶಕಗಳಿಂದ ಯಾವುದೇ ಅನುದಾನವಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿವೆ. ಅನುದಾನದ ಕೊರತೆಯಿಂದಾಗಿ ಹಲವು ಶಾಲೆಗಳು ಮುಚ್ಚುವ ಹಂತ ತಲುಪಿದ್ದು, ಇಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಕೂಡ ನಿವೃತ್ತಿಯ ಅಂಚಿನಲ್ಲಿದ್ದಾರೆ ಎಂದು ಒಕ್ಕೂಟದ ಪ್ರಮುಖರು ಸಚಿವರ ಗಮನಕ್ಕೆ ತಂದರು.
ಶಾಲಾ ಕಾಲೇಜುಗಳ ಉಳಿವಿಗಾಗಿ ವೇತನಾನುದಾನ ನೀಡಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು ಸಚಿವರಿಗೆ ಮನವಿ ಮಾಡಿದರು.
ವೇತನಾನುದಾನಕ್ಕೆ ಸಚಿವರ ಭರವಸೆ
ಒಕ್ಕೂಟದ ಮನವಿಯನ್ನು ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಆದ್ಯತೆಯ ಕರ್ತವ್ಯ ಎಂದು ಅವರು ತಿಳಿಸಿದರು.
ಅಲ್ಲದೆ, 1995ರಿಂದ ಇವರೆಗಿನ ಕನ್ನಡ ಶಾಲೆಗಳು ಮತ್ತು ಕಾಲೇಜುಗಳಿಗೆ ವೇತನಾನುದಾನ ನೀಡುವ ಬೇಡಿಕೆಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಆರ್ಥಿಕ ಇಲಾಖೆಯಿಂದ ಶೀಘ್ರವೇ ಅನುಮೋದನೆ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ಭರವಸೆ ನೀಡಿದರು.
ಈ ಮೂಲಕ ಹಲವು ವರ್ಷಗಳಿಂದ ಅನುದಾನದ ನಿರೀಕ್ಷೆಯಲ್ಲಿರುವ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಸಿಬ್ಬಂದಿಗೆ ಸರ್ಕಾರದ ಮಟ್ಟದಲ್ಲಿ ಸಕಾರಾತ್ಮಕ ಸ್ಪಂದನೆ ದೊರೆಯುವ ನಿರೀಕ್ಷೆ ಮೂಡಿದೆ.
ಪ್ರಮುಖರು ಉಪಸ್ಥಿತಿ
ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಜಿ.ಸಿ. ಶಿವಪ್ಪ, ಗೌರವಾಧ್ಯಕ್ಷರಾದ ರಾಜಕುಮಾರ ಕಾಮರೆಡ್ಡಿ, ಪ್ರಧಾನ ಕಾರ್ಯದರ್ಶಿ ಐ.ಎಸ್. ಹೊರಗಿನ ಮಠ ಸೇರಿದಂತೆ ವಿವಿಧ ಜಿಲ್ಲೆಗಳ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ ನದೀಂ ಕೆಎಂ



Comments
Post a Comment