ಅಂಜನಾಪುರ ಜಲಾಶಯಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರಿಂದ ಬಾಗಿನ ಸಮರ್ಪಣೆ

ಶಿಕಾರಿಪುರ,: ಉತ್ತಮ ಮಳೆಯ ಪರಿಣಾಮ ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಶಿಕಾರಿಪುರ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಂಪ್ರದಾಯಬದ್ಧವಾಗಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.




ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆದ ಬಾಗಿನ ಸಮರ್ಪಣೆಯಲ್ಲಿ ನಾಡಿನ ಸಮೃದ್ಧಿ, ರೈತರ ಅಭಿವೃದ್ಧಿ, ಉತ್ತಮ ಬೆಳೆ, ರಾಜ್ಯದಲ್ಲಿ ಸಮರ್ಪಕ ಮಳೆ ಹಾಗೂ ಜನರ ಸುಖ-ಶಾಂತಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕರ್ನಾಟಕದ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿರುವ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, ಉತ್ತಮ ಮಳೆಯಿಂದ ಜಲಾಶಯಗಳು ಭರ್ತಿಯಾಗಿರುವುದು ರೈತರಿಗೆ ಸಂತಸದ ವಿಚಾರವಾಗಿದೆ. ಜಲಾಶಯಗಳಲ್ಲಿ ಸಮರ್ಪಕ ನೀರಿನ ಸಂಗ್ರಹವಾಗಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ರೈತರು ಆತ್ಮವಿಶ್ವಾಸದಿಂದ ಕೃಷಿ ಕಾರ್ಯಗಳನ್ನು ಕೈಗೊಳ್ಳಬಹುದಾಗಿದೆ ಎಂದು ಹೇಳಿದರು. ನೀರಿನ ಸದ್ಬಳಕೆ ಹಾಗೂ ಜಲಸಂಪನ್ಮೂಲಗಳ ಸಂರಕ್ಷಣೆಗೆ ಎಲ್ಲರೂ ಒತ್ತು ನೀಡಬೇಕೆಂದೂ ಅವರು ಕರೆ ನೀಡಿದರು.



ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ನೂರಾರು ಸಾರ್ವಜನಿಕರು ಭಾಗವಹಿಸಿ ಬಾಗಿನ ಸಮರ್ಪಣೆಯಲ್ಲಿ ಪಾಲ್ಗೊಂಡರು. ಪೂಜೆಯ ಬಳಿಕ ಪ್ರಸಾದ ವಿತರಣೆ ನಡೆಯಿತು.


ಅಂಜನಾಪುರ ಜಲಾಶಯ ಭರ್ತಿಯಾಗಿರುವುದು ಶಿಕಾರಿಪುರ ಹಾಗೂ ಸುತ್ತಮುತ್ತಲಿನ ಭಾಗಗಳ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದ್ದು, ಈ ಭಾಗದ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿದೆ ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಯಿತು.


ವರದಿ  ನದೀಮ್ ಕೆ ಮ್

Comments

Post a Comment