ತುಂಗ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯಡಿ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ

ರೈತರ ಅಹವಾಲಿಗೆ ಸ್ಪಂದಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್; ಕೆರೆಗಳಿಗೆ ತಾರತಮ್ಯವಿಲ್ಲದೆ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ



ಶಿವಮೊಗ್ಗ, ಆ.4: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ತಮ್ಮ ಕಚೇರಿಯಲ್ಲಿ ತುಂಗ ಏತ ನೀರಾವರಿ ಯೋಜನೆ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆ ವ್ಯಾಪ್ತಿಗೆ ಒಳಪಡುವ ಕೆರೆಗಳಿಗೆ ನೀರು ತುಂಬಿಸುವ ಕುರಿತು ನೀರಾವರಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಸಭೆಯಲ್ಲಿ ಹಾರನಹಳ್ಳಿ ಹಾಗೂ ಕುಂಸಿ ಭಾಗದ ರೈತರು ಭಾಗವಹಿಸಿ, ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿಯದಿರುವುದು, ನೀರಿನ ಹಂಚಿಕೆಯಲ್ಲಿ ಉಂಟಾಗಿರುವ ಸಮಸ್ಯೆಗಳು ಹಾಗೂ ಮುಂಬರುವ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಲಭ್ಯತೆ ಕುರಿತು ತಮ್ಮ ಅಹವಾಲುಗಳನ್ನು ಶಾಸಕರ ಗಮನಕ್ಕೆ ತಂದರು.

ರೈತರ ಸಮಸ್ಯೆಗಳನ್ನು ಆಲಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು, ತುಂಗ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಕೆರೆಗಳಿಗೂ ಯಾವುದೇ ತಾರತಮ್ಯವಿಲ್ಲದೆ ನೀರು ತುಂಬಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಿ, ಯೋಜನೆಯ ಉದ್ದೇಶ ಸಂಪೂರ್ಣವಾಗಿ ಈಡೇರುವಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ನೀರಿನ ಹರಿವು, ಕೆರೆಗಳ ಭರ್ತಿ ಪ್ರಗತಿ ಹಾಗೂ ತಾಂತ್ರಿಕ ಅಡಚಣೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತ್ವರಿತವಾಗಿ ಕೈಗೊಂಡು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ಜೊತೆಗೆ, ನೀರಾವರಿ ವ್ಯವಸ್ಥೆಯಲ್ಲಿ ಸಮನ್ವಯ ಕಾಪಾಡಿಕೊಂಡು ಪ್ರತಿಯೊಂದು ಕೆರೆಯೂ ಭರ್ತಿಯಾಗುವಂತೆ ಕಾರ್ಯಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶಿಸಿದರು.

ಸಭೆಯಲ್ಲಿ ನೀರಾವರಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಹಾರನಹಳ್ಳಿ ಮತ್ತು ಕುಂಸಿ ಭಾಗದ ರೈತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ನದೀಮ್ ಕೆ.ಎಂ.



 

Comments